ಆತ್ಮಹತ್ಯೆಗೆ ಯತ್ನಿಸಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್
ಮೂರು ದಿನಗಳ ಹಿಂದೆ ಸಂತೋಷ್ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಒಂದು ದಿನ ಐಸಿಯು ವಾರ್ಡ್ನಲ್ಲಿ ಇರಿಸಲಾಗಿತ್ತು.
ಬೆಂಗಳೂರು (ನ. 30): ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಹತ್ತಿರದ ಸಂಬಂಧಿ ಮತ್ತು ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಕೆಲವು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದರು. ಮನೆಯಲ್ಲಿ ನಿದ್ರೆ ಮಾತ್ರೆಗಳನ್ನು ಸೇವಿಸಿ ಸಂತೋಷ್ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಘಟನೆ ರಾಜ್ಯಾದ್ಯಂತ ಚರ್ಚೆಯಾಗಿತ್ತು. 37 ವರ್ಷದ ಎನ್.ಆರ್. ಸಂತೋಷ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಿಂದ ಎನ್.ಆರ್ ಸಂತೋಷ್ ಇಂದು ಡಿಸ್ಚಾರ್ಜ್ ಆಗಲಿದ್ದಾರೆ. ಇಂದು ಬೆಳಗ್ಗೆ 10 ಘಂಟೆಗೆ ಸಂತೋಷ್ಗೆ ರೋಟಿನ್ ಹೆಲ್ತ್ ಚೆಕಪ್ ನಡೆಸಲಿರುವ ವೈದ್ಯರು ಬಳಿಕ ಡಿಸ್ಚಾರ್ಜ್ ಮಾಡಲಿದ್ದಾರೆ. ಮೂರು ದಿನಗಳ ಹಿಂದೆ ಸಂತೋಷ್ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಒಂದು ದಿನ ಐಸಿಯು ವಾರ್ಡ್ನಲ್ಲಿ ಇರಿಸಲಾಗಿತ್ತು.
ನಿನ್ನೆ ಬೆಳಗ್ಗೆ ಜನರಲ್ ವಾರ್ಡ್ಗೆ ಸಂತೋಷ್ ಅವರನ್ನು ಶಿಫ್ಟ್ ಮಾಡಲಾಗಿತ್ತು. ಇನ್ನೂ 48 ಘಂಟೆಗಳ ವಿಶ್ರಾಂತಿ ಅಗತ್ಯ ಎಂದಿದ್ದ ವೈದ್ಯರು ಇಂದು ಅವರನ್ನು ಮನೆಗೆ ಕಳುಹಿಸಲಿದ್ದಾರೆ. ಇಂದು ಡಿಸ್ಚಾರ್ಜ್ ಆದ ಬಳಿಕ ಸಂತೋಷ್ ಅವರ ಮನೆಗೆ ತೆರಳಿ ಸದಾಶಿವನಗರದ ಪೊಲೀಸರು ಸ್ಟೇಟ್ಮೆಂಟ್ ಪಡೆಯಲಿದ್ದಾರೆ.
ಯಡಿಯೂರಪ್ಪನವರ ಆಪ್ತ ವಲಯದಲ್ಲಿದ್ದ ಎನ್ಆರ್ ಸಂತೋಷ್ ಆತ್ಮಹತ್ಯೆಗೆ ಪ್ರಯತ್ನಿಸಲು ಕಾರಣವೇನು? ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಸಕ್ರಿಯ ರಾಜಕಾರಣಕ್ಕೂ ಪ್ರವೇಶಿಸಲು ಬಯಸಿದ್ದ ಸಂತೋಷ್ ಅದಕ್ಕಾಗಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದರು ಎನ್ನಲಾಗಿದೆ. ಸಿಎಂ ಯಡಿಯೂರಪ್ಪನವರ ಅಕ್ಕನ ಮೊಮ್ಮಗನಾಗಿರುವ ಸಂತೋಷ್ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು. ಸಂತೋಷ್ ಆತ್ಮಹತ್ಯೆಯ ಹಿಂದಿರುವ ಕಾರಣದ ಕುರಿತು ತನಿಖೆಯಾಗಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸಿವೆ.