ಸಾರಿಗೆ ನೌಕರರ ಮುಷ್ಕರದ ಹಿಂದೆ ಕಾಣದ ಶಕ್ತಿಗಳ ಷಡ್ಯಂತ್ರ; ಕಾರ್ಮಿಕರನ್ನು ದಿಕ್ಕು ತಪ್ಪಿಸುವವರ ವಿರುದ್ಧ ಅಶ್ವತ್ಹನಾರಾಯಣ ಕಿಡಿ
ಯಾವುದೇ ಕಾರಣಕ್ಕೂ ಮುಷ್ಕರ ಮುದುವರಿಸುವುದು ಸರಿಯಲ್ಲ. ಮುಖ್ಯಮಂತ್ರಿಗಳ ಮುಂದೆಯೇ ಮುಷ್ಕರ ವಾಪಸ್ ಪಡೆಯುವುದಾಗಿ ಒಪ್ಪಿಕೊಂಡು ಹೋದ ಮುಖಂಡರು, ಹೊರಗೆ ಹೋದ ಸ್ವಲ್ಪ ಹೊತ್ತಿನಲ್ಲೇ ವರಸೆ ಬದಲಿಸಿದ್ದು ಯಾಕೆ? ಅವರ ಹಿಂದೆ ಯಾರಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರು: ಮುಷ್ಕರನಿರತ ಸಾರಿಗೆ ನೌಕರರು ಕೂಡಲೇ ಮುಷ್ಕರವನ್ನು ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು. ಅವರನ್ನು ದಿಕ್ಕು ತಪ್ಪಿಸುತ್ತಿರುವ ನಕಲಿ ನಾಯಕರಿಗೆ ತಕ್ಕ ಶಾಸ್ತಿ ಕಾದಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ನೇರ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಯಾವುದೇ ಕಾರಣಕ್ಕೂ ಮುಷ್ಕರ ಮುದುವರಿಸುವುದು ಸರ್ವಥಾ ಸರಿಯಲ್ಲ. ಮುಖ್ಯಮಂತ್ರಿಗಳ ಮುಂದೆಯೇ ಮುಷ್ಕರ ವಾಪಸ್ ಪಡೆಯುವುದಾಗಿ ಒಪ್ಪಿಕೊಂಡು ಹೋದ ಮುಖಂಡರು, ಹೊರಗೆ ಹೋದ ಸ್ವಲ್ಪ ಹೊತ್ತಿನಲ್ಲೇ ವರಸೆ ಬದಲಿಸಿದ್ದು ಯಾಕೆ? ಅವರ ಹಿಂದೆ ಯಾರಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ಕಾಣದ ಶಕ್ತಿಗಳು ನೌಕರರನ್ನು ದಾರಿ ತಪ್ಪಿಸಲಾಗುತ್ತಿದೆ. ರೈತ ನಾಯಕರ ಸೋಗಿನಲ್ಲಿದ್ದವರು ಇದ್ದಕ್ಕಿದ್ದ ಹಾಗೆ ಸಾರಿಗೆ ನೌಕರರ ಮುಖಂಡರಾಗಿದ್ದು ಹೇಗೆ? ಇದರಲ್ಲಿ ಅಡಗಿರುವ ಹಿತಾಸಕ್ತಿ ಏನು? ಮುಂದೆ ಕಾರ್ಮಿಕರನ್ನು ಬಿಟ್ಟು ಹಿಂದೆ ಯಾರೆಲ್ಲ ಆಟ ಆಡುತ್ತಿದ್ದಾರೆ? ಅವರ ದುರುದ್ದೇಶವೇನಿದೆ? ಎಂಬುದು ಎಲ್ಲರಿಗೂ ಅರ್ಥವಾಗುತ್ತಿದೆ. ಸರಕಾರಕ್ಕೂ ಈ ಬಗ್ಗೆ ಗೊತ್ತಿದೆ ಎಂದು ಡಿಸಿಎಂ ಅಶ್ವತ್ಹನಾರಾಯಣ ಅವರು ನೇರವಾಗಿ ಕೋಡಿಹಳ್ಳಿ ಚಂದ್ರಶೇಖರ್ ಮೇಲೆ ಚಾಟಿ ಬೀಸಿದರು.
ಮುಖ್ಯಮಂತ್ರಿಗಳು ಸಾಧ್ಯವಾಗುವ ಎಲ್ಲ ಬೇಡಿಕೆಗಳನ್ನು ಈಡೇರಿಸುವುದಾಗಿ ಸ್ಪಷ್ಟವಾಗಿ ಹೇಳಿದ್ದಾರೆ. ಅವರು ಒಮ್ಮೆ ಹೇಳಿದರೆಂದರೆ ಬೇಡಿಕೆಗಳು ಕ್ಷಿಪ್ರಗತಿಯಲ್ಲಿ ಈಡೇರುತ್ತವೆ ಎಂಬುದು ಅನೇಕ ಸಲ ಸಾಬೀತಾಗಿದೆ ಎಂದಿದ್ದಾರೆ.
ರಾಜ್ಯದ ಜನರು ಬಸ್ ಸೌಕರ್ಯವಿಲ್ಲದೆ ತೀವ್ರ ಕಷ್ಟಕ್ಕೆ ಸಿಲುಕಿದ್ದಾರೆ. ಈ ಬಿಕ್ಕಟ್ಟು ಮತ್ತೂ ಹೆಚ್ಚಾಗುವುದು ಬೇಡ. ಸಾರಿಗೆ ಸಿಬ್ಬಂದಿ ಹಲವಾರು ಬೇಡಿಕೆಗಳನ್ನು ಸರಕಾರದ ಮುಂದಿಟ್ಟಿದ್ದರು. ಅವುಗಳಲ್ಲಿ ಸರಕಾರದ ಆರ್ಥಿಕ ಶಕ್ತಿಯ ಇತಿಮಿತಿಯೊಳಗೆ ಕೆಲ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಮಾತಿಗೆ ಓಗೊಟ್ಟು ಸಾರಿಗೆ ನೌಕರರು ಕರ್ತವ್ಯಕ್ಕೆ ಮರಳಬೇಕು. ಜನರು ಸಂಕಷ್ಟ ಅನುಭವಿಸಿದ್ದು ಸಾಕು ಎಂದರು.
ಸಾರಿಗೆ ಸಿಬ್ಬಂದಿಯ ಬೇಡಿಕೆಗಳ ಬಗ್ಗೆ ಸರಕಾರಕ್ಕೆ ಗಮನವಿದೆ. ಸಹಾನುಭೂತಿಯೂ ಇದೆ. ಆದರೆ, ಜನರಿಗೆ ತೊಂದರೆಯನ್ನು ಸಹಿಸಲು ಸಾಧ್ಯವಿಲ್ಲ. ಸಾರ್ವಜನಿಕರು ಇನ್ನೂ ತೊಂದರೆ ಅನುಭವಿಸುವುದನ್ನು ನೋಡಿಕೊಂಡಿರಲು ಸಾಧ್ಯವಿಲ್ಲ. ಕೂಡಲೇ ಸಾರಿಗೆ ನೌಕರರು ಕರ್ತವ್ಯ ಹಾಜರಾಗಬೇಕು ಎಂಬುದು ನನ್ನ ಮನವಿ ಎಂದಿದ್ದಾರೆ.