ಕೊರೋನಾಗೆ ಮಹಾರಾಷ್ಟ್ರ ಕಂಗಾಲು: ಒಂದೇ ದಿನ 6 ಸಾವಿರ ಹೊಸ ಕೇಸ್ ಪತ್ತೆ

ನವದೆಹಲಿ: ಇಡೀ ವಿಶ್ವವನ್ನು ಕಾಡುತ್ತಿರುವ ಮಹಾಮಾರಿ ಕೊರೋನಾ ಆರ್ಭಟ ಇನ್ನೂ ತಣ್ಣಗಾಗುವ ಲಕ್ಷಣಗಳು ಕಂಡು ಬರುತ್ತಿಲ್ಲ. ಭಾರತದಲ್ಲಿ ಕೊರೋನಾ 2ನೇ ಅಲೆ ಆತಂಕ ಶುರುವಾಗಿದ್ದು, ದೇಶದ ಕೆಲವು ರಾಜ್ಯಗಳಲ್ಲಿ ಕೊರೋನಾ ಅಬ್ಬರ ಹೆಚ್ಚಾಗುತ್ತಿದೆ. ಪ್ರಮುಖವಾಗಿ ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಲ್ಲಿ ಪ್ರತೀನಿತ್ಯ ಹೊಸ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ.

ಕೇರಳದಲ್ಲಿ ಒಂದೇ ದಿನ ಎರಡೂವರೆ ಸಾವಿರ ಹೊಸ ಪ್ರಕರಣಗಳು ಪತ್ತೆಯಾಗಿದ್ದರೆ, ಮಹಾರಾಷ್ಟ್ರ ಒಂದು ರಾಜ್ಯದಲ್ಲಿಯೇ 6 ಸಾವಿರ ಹೊಸ ಪ್ರಕರಣಗಳು ಪತ್ತೆಯಾಗಿ ಆತಂಕ ಹೆಚ್ಚಾಗುವಂತೆ ಮಾಡಿದೆ.

ಕೇವಲ ಈ ಎರಡು ರಾಜ್ಯಗಳಲ್ಲಿ ಅಷ್ಟೇ ಅಲ್ಲದೆ. ಛತ್ತೀಸ್ಗಢ, ಮಧ್ಯಪ್ರದೇಶ, ಪಂಜಾಬ್ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಕೊರೋನಾ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ.

ಇಷ್ಟು ದಿನ ಪ್ರತೀನಿತ್ಯ 5,000ಕ್ಕಿಂತ ಕಡಿಮೆ ಹೊಸ ಸೋಂಕಿತ ಪ್ರಕರಣಗಳು ದಾಖಲಾಗುತ್ತಿದ್ದ ಮಹಾರಾಷ್ಟ್ರದಲ್ಲಿ ಮಂಗಳವಾರ ಇದ್ದಕ್ಕಿದ್ದಂತೆ ಸೋಂಕಿತ ಪ್ರಕರಣಗಳ ಸಂಖ್ಯೆ 6,000ಕ್ಕೆ ತಲುಪಿದೆ. ಅಲ್ಲದೆ, ಮಹಾಮಾರಿ ವೈಸರ್ ಒಂದೇ ದಿನ 51 ಮಂದಿಯನ್ನು ಬಲಿಪಡೆದುಕೊಂಡಿದ್ದು, ಇದು ಆತಂಕ ಹೆಚ್ಚಾಗುವಂತೆ ಮಾಡಿದೆ.

ಮಹಾರಾಷ್ಟ್ರ ರಾಜ್ಯದಲ್ಲಿ ಸೋಮವಾರ 5,210 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಮಂಗಳವಾರ 6,218 ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 21,12,312ಕ್ಕೆ ಏರಿಕೆಯಾಗಿದೆ.

ಇನ್ನು ಒಂದೇ ದಿನ ಮಹಾಮಾರಿ ವೈರಸ್ 51 ಮಂದಿಯನ್ನು ಬಲಿಪಡೆದುಕೊಂಡಿದ್ದು, ರಾಜ್ಯದಲ್ಲಿ ಸಾವಿನ ಸಂಖ್ಯೆ 51,857ಕ್ಕೆ ತಲುಪಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದೇಶದ ಸಕ್ರಿಯ ಪ್ರಕರಣಗಳಲ್ಲಿ ಕೇರಳದಲ್ಲಿ ಶೇಕಡಾ 38, ಮಹಾರಾಷ್ಟ್ರದಲ್ಲಿ ಶೇಕಡಾ 37 ರಷ್ಟು ಪ್ರಕರಣಗಳಿವೆ. ಹೀಗಾಗಿ ಈ ಎರಡೂ ರಾಜ್ಯಗಳನ್ನೇ ಗಮನದಲ್ಲಿಟ್ಟುಕೊಂಡು ಕೇಂದ್ರ ಹೊಸ ಕಾರ್ಯತಂತ್ರ ಹೆಣೆಯುತ್ತಿದೆ ಎಂದು ತಿಳಿದುಬಂದಿದೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *