ಬಜೆಟ್‌ನಲ್ಲಿ ಉತ್ತರ, ಕಲ್ಯಾಣ ಕರ್ನಾಟಕಕ್ಕೆ ಸಿಎಂ ಬಿಎಸ್‌ವೈ ಮೋಸ: ಅಶೋಕ್‌ ಪೂಜಾರಿ

ಬೆಳಗಾವಿ: ಸಿಎಂ ಬಿಎಸ್‌ ಯಡಿಯೂರಪ್ಪ ಅವರು ಉತ್ತರ ಕರ್ನಾಟಕ ಹಾಗು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪೂರಕವಾದ ಬಜೆಟ್ ಮಂಡಿಸದೇ ಮೋಸ ಮಾಡಿದ್ದಾರೆ ಎಂದು ಜೆಡಿಎಸ್‌ ಮುಖಂಡ ಅಶೋಕ್‌ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಅವರು, ಬಜೆಟ್‌ ಅಧಿವೇಶನದಲ್ಲಿ ರಾಜ್ಯ ಮಟ್ಟದ ಕಚೇರಿಗಳನ್ನು ಸುವರ್ಣ ಸೌಧಕ್ಕೆ ಸ್ಥಳಾಂತರಿಸಲು ಕ್ರಮಕೈಗೊಳ್ಳಬೇಕು. ಇಲ್ಲವಾದರೇ ಇದೆ ತಿಂಗಳು ಮಾರ್ಚ್‌ 22ರಿಂದ ಸುವರ್ಣ ಸೌಧದ ಮುಂದೆ ಧರಣಿ ಸತ್ಯಾಗ್ರಹ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಬರೀ ಕಟ್ಟಡ ನಿರ್ಮಾಣ ಮಾಡಿದರೆ ಸಾಲದು, ಎಲ್ಲ ಕಚೇರಿಗಳನ್ನು ಬೆಳಗಾವಿ ಸುವರ್ಣ ಸೌಧಕ್ಕೆ ಸ್ಥಳಾಂತರ ಮಾಡಿ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಬೇಕೆಂದು ಒತ್ತಾಯಿಸಿದರು. ಈ ವಿಷಯದನ್ವಯ ನಾವು, ಸ್ವಾಮಿಜೀಗಳು, ಮಠಾಧೀಶರ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ಕೂಡಾ ಮಾಡಿದ್ದೇವೆ ಎಂದರು.

ಆಗ ವಿರೋಧ ಪಕ್ಷದಲ್ಲಿದ್ದ ಸಿಎಂ ಯಡಿಯೂರಪ್ಪ ಅವರು ಪ್ರತಿಭಟನಾ ಸ್ಥಳಕ್ಕೆ ಬಂದು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಕಚೇರಿಗಳ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದರು. ಆದರೆ, ಈಗ ಅವರೇ ಅಧಿಕಾರದಲ್ಲಿ ಇದ್ದರೂ ಕೊಟ್ಟ ಮಾತನ್ನು ಮರೆತಿದ್ದಾರೆ. ಉತ್ತರ ಕರ್ನಾಟಕದ ಜನರ ಭಾವನೆಗಳ ಜೊತೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಕಿಡಿಕಾರಿದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *