Corona Vaccine: ಅಂತೂ ಇಂತೂ ಲಸಿಕೆ ಬಂತು, ರಾಜ್ಯದಲ್ಲಿ ನಾಳೆಯಿಂದಲೇ 18-44 ವರ್ಷ ವಯೋಮಾನದವರಿಗೆ ಕೋವಿಡ್ ವ್ಯಾಕ್ಸಿನ್ !

ಬೆಂಗಳೂರು (ಮೇ 09): ಮೇ 10 ರಿಂದ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಮೇ 10 ರಿಂದ ಬೆಂಗಳೂರಿನ ಕೆ.ಸಿ.ಜನರಲ್, ಜಯನಗರ ಜನರಲ್, ಸರ್ ಸಿ.ವಿ.ರಾಮನ್ ಜನರಲ್, ಇಎಸ್ ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷದವರಿಗೆ ಕೋವಿಡ್ ಲಸಿಕೆ ವಿತರಿಸಲಾಗುವುದು. ಇತರೆ ಜಿಲ್ಲೆಗಳಲ್ಲಿ ಆರಂಭಿಕವಾಗಿ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಹಾಗೂ ಸರ್ಕಾರಿ ಮೆಡಿಕಲ್ ಕಾಲೇಜುಗಳಲ್ಲಿ 18-44 ವಯೋಮಾನದವರಿಗೆ ಲಸಿಕೆ ನೀಡಲಾಗುವುದು. ಲಸಿಕೆ ಪೂರೈಕೆ ಹೆಚ್ಚಾಗುತ್ತಿದ್ದಂತೆ, ಮುಂದಿನ ದಿನಗಳಲ್ಲಿ ಇನ್ನಷ್ಟು ಲಸಿಕೆ ಕೇಂದ್ರಗಳಲ್ಲಿ ವಿತರಣೆ ಆರಂಭಿಸಲಾಗುವುದು ಎಂದಿದ್ದಾರೆ.

18-44 ವಯೋಮಾನದವರಿಗೆ ಲಸಿಕೆ ವಿತರಿಸುವ ಎಲ್ಲಾ ಕೇಂದ್ರಗಳಲ್ಲಿ ಈ ಗುಂಪಿನವರಿಗೆ ಪ್ರತ್ಯೇಕ ಸ್ಥಳ ಗುರುತಿಸಲಾಗುವುದು. ಕೋವಿನ್ ಅಥವಾ ಆರೋಗ್ಯ ಸೇತು ಆ್ಯಪ್ ಮೂಲಕ ನೋಂದಣಿ ಮಾಡಿಸಿ, ಸಮಯ ನಿಗದಿ ಮಾಡಿಕೊಂಡಿರುವವರಿಗೆ ಮಾತ್ರ ಲಸಿಕೆ ನೀಡಲಾಗುವುದು. ನೋಂದಣಿ ಇಲ್ಲದೆ ನೇರವಾಗಿ ಲಸಿಕೆ ಕೇಂದ್ರಕ್ಕೆ ಬರುವವರಿಗೆ ಅವಕಾಶವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಪ್ರತಿ ವ್ಯಕ್ತಿಗೂ ಆದಷ್ಟು ಶೀಘ್ರದಲ್ಲಿ ಲಸಿಕೆ ಒದಗಿಸಲು ಸರ್ಕಾರ ಬದ್ಧವಾಗಿದೆ. ಅಗತ್ಯ ಲಸಿಕೆ ಪೂರೈಕೆ ಮಾಡಿಕೊಳ್ಳಲು ನಿರಂತರ ಪ್ರಯತ್ನ ಸಾಗಿದೆ. ಆದ್ದರಿಂದ ಎಲ್ಲಾ ನಾಗರಿಕರು, ಅದರಲ್ಲೂ ವಿಶೇಷವಾಗಿ ಯುವಜನತೆ ತಮ್ಮ ಸರದಿಗಾಗಿ ತಾಳ್ಮೆಯಿಂದ ಕಾಯಬೇಕು. ಖಂಡಿತವಾಗಿ ಲಸಿಕೆ ಸಿಗುತ್ತದೆ ಎಂದು ಸಚಿವರು ಮನವಿ ಮಾಡಿದ್ದಾರೆ.

18-44 ವರ್ಷವರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಮೇ 1 ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಾಂಕೇತಿಕ ಚಾಲನೆ ನೀಡಿದ್ದರು. ರಾಜ್ಯದಲ್ಲಿ 3.26 ಕೋಟಿ ಜನ ಈ ವಯೋಮಾನದವರಿದ್ದಾರೆ. ಎಲ್ಲರಿಗೂ ಸೇರಿ ಒಟ್ಟು 6.52 ಕೋಟಿ ಡೋಸ್ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ 2 ಕೋಟಿ ಕೋವಿಶೀಲ್ಡ್ ಡೋಸ್ ಹಾಗೂ 1 ಕೋಟಿ ಕೋವ್ಯಾಕ್ಸಿನ್ ಡೋಸ್ ಪೂರೈಕೆಗೆ ಬೇಡಿಕೆ ಇಡಲಾಗಿದೆ. ಸೀರಂ ಸಂಸ್ಥೆಯಿಂದ ಈವರೆಗೆ 6.5 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆಯಲಾಗಿದೆ. ಇನ್ನಷ್ಟು ಲಸಿಕೆ ಮೇ 2 ಅಥವಾ ಮೂರನೇ ವಾರ ಸಿಗಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ರಾಜ್ಯ ಸರ್ಕಾರ ಖರೀದಿಸುತ್ತಿರುವ 2 ಕೋಟಿ ಡೋಸ್ ಕೋವಿಶೀಲ್ಡ್ ಪೈಕಿ ಶನಿವಾರ ರಾತ್ರಿ 3.5 ಲಕ್ಷ ಡೋಸ್ ರಾಜ್ಯಕ್ಕೆ ತಲುಪಿದ್ದು, ಈವರೆಗೂ ಒಟ್ಟು 6.5 ಲಕ್ಷ ಡೋಸ್ ಪೂರೈಕೆಯಾಗಿದೆ. ಕೇಂದ್ರ ಸರ್ಕಾರ ಈವರೆಗೂ 99,58,190 ಕೋವಿಶೀಲ್ಡ್, 10,91,280 ಕೋವ್ಯಾಕ್ಸಿನ್ ಸೇರಿ  ಒಟ್ಟು 1,10,49,470 ಡೋಸ್ ಲಸಿಕೆಗಳನ್ನು ರಾಜ್ಯಕ್ಕೆ ಪೂರೈಕೆ ಮಾಡಿದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.

ಅಲ್ಲಿಗೆ ಯಾವಾಗ ತಮಗೆ ಲಸಿಕೆ ದೊರೆಯುವುದೋ ಎಂದು ಆತಂಕದಿಂದಲೇ ಕಾಯುತ್ತಿದ್ದ ಸಾರ್ವಜನಿಕರಿಗೆ ಸಮಾಧಾನ ಸಿಕ್ಕಂತಾಗಿದೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *