ಆಕ್ಸಿಜನ್, ಲಸಿಕೆ ಪೂರೈಕೆ ವಿಚಾರದಲ್ಲಿ ಕೇಂದ್ರದಿಂದ ನಿರ್ಲಕ್ಷ್ಯ ಧೋರಣೆ, ಈಶ್ವರ್ ಖಂಡ್ರೆ ಆರೋಪ

ಹೈಲೈಟ್ಸ್‌:

  • ಆಕ್ಸಿಜನ್ ಪೂರೈಕೆ ವಿಚಾರದಲ್ಲಿ ಕೇಂದ್ರದಿಂದ ನಿರ್ಲಕ್ಷ್ಯ ಧೋರಣೆ ಅನುಸರಿಸಿದೆ
  • ಇದೀಗ ಲಸಿಕೆ ಹಂಚಿಕೆಯಲ್ಲಿ ತಾರತಮ್ಯ ಅನುಸರಿಸುತ್ತಿದೆ ಎಂದು ಆರೋಪ
  • ಟ್ವೀಟ್‌ ಮೂಲಕ ಆರೋಪ ಮಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ

ಬೆಂಗಳೂರು: ರಾಜ್ಯಕ್ಕೆ ಆಕ್ಸಿಜನ್ ಪೂರೈಕೆ ವಿಚಾರವಾಗಿ ಕೇಂದ್ರ ಸರ್ಕಾರ ನಿರ್ಲಕ್ಷ್ಯದ ಧೋರಣೆಯನ್ನು ಅನುಸರಿಸುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ.

ಕರ್ನಾಟಕಕ್ಕೆ ಆಕ್ಸಿಜನ್ ಬಂದಿದ್ದು ಹೈಕೋರ್ಟ್ ಆದೇಶದಿಂದ. ಅದನ್ನೂ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿ ಮುಖಭಂಗ ಅನುಭವಿಸಿತು. ಇದು ರಾಜ್ಯದ ಬಗ್ಗೆ ಕೇಂದ್ರಕ್ಕೆ ಇರುವ ನಿರ್ಲಕ್ಷ್ಯ ಧೋರಣೆಗೆ ಸಾಕ್ಷಿಯಾಗಿದೆ. ಈಗ ಕರ್ನಾಟಕದಲ್ಲಿ ಕೋವಿಡ್ ನಿಂದ ಸಾವಿರಾರು ಜನ ಸಾಯುತ್ತಿದ್ದರೂ, ಸೋಂಕು, ಸಾವಿನಲ್ಲಿರಾಜ್ಯವೇ ನಂ.1 ಆಗಿದ್ದರೂ ಲಸಿಕೆ ಪೂರೈಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

14 ರಾಜ್ಯಗಳಿಗೆ ಕೋವ್ಯಾಕ್ಸಿನ್ ಮೇ. 1ರಿಂದಲೇ ಹೋಗುತ್ತಿದೆ. 11 ದಿನಗಳಾದರೂ ರಾಜ್ಯಕ್ಕೆ ಲಸಿಕೆ ಬಂದಿಲ್ಲ. 25 ಬಿಜೆಪಿ ಸಂಸದರನ್ನು ಗೆಲ್ಲಿಸಿದಕ್ಕೆ ರಾಜ್ಯಕ್ಕೆ ತಕ್ಕ ಮರ್ಯಾದೆ ಸಿಗುತ್ತಿದೆ. ಸಂಸದರು ಕೇಂದ್ರದಲ್ಲಿ ಸಚಿವರಾಗಿರುವ ರಾಜ್ಯದ ನಾಯಕರ ಬಾಯಿ ಸತ್ತು ಹೋಗಿದೆಯೇ? ಎಂದು ಅವರು ಪ್ರಶ್ನಿಸಿದ್ದಾರೆ.

ರಾಜ್ಯಕ್ಕೆ ಆಕ್ಸಿಜನ್ ಪೂರೈಕೆ ಮಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿತ್ತು. ಆದರೆ ಕೇಂದ್ರ ಸರ್ಕಾರ ಇದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಆದರೆ ಸುಪ್ರೀಂ ಕೋರ್ಟ್‌ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿತ್ತು.

ಈ ನಡುವೆ ರಾಜ್ಯದಲ್ಲಿ ಲಸಿಕೆ ಕೊರತೆಯೂ ಎದುರಾಗಿದೆ. ಮೊದಲನೇ ಡೋಸ್ ಪಡೆದವರಿಗೆ ಎರಡನೇ ಡೋಸ್ ಲಸಿಕೆ ಸಿಗುತ್ತಿಲ್ಲ. 18 ರಿಂದ 45 ವರ್ಷ ವಯೋಮಾನದವರಿಗೆ ಲಸಿಕೆ ನೀಡಲು ಸರ್ಕಾರ ಘೋಷಣೆ ಮಾಡಿದರೂ ಲಸಿಕೆ ಕೊರತೆಯಿಂದ ಅದು ಸರಿಯಾಗಿ ಜಾರಿಗೆ ಬರುತ್ತಿಲ್ಲ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *