ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ನಳೀನ್ ಕುಮಾರ್ ಕಟೀಲ್ ಗೆ ಬಿಎಸ್ ವೈ ಕಿವಿಮಾತು
ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Naleen Kumar kateel) ಅವರಿಗೆ ಕಿವಿಮಾತು ಹೇಳಿದ್ದಾರೆ. “ಯಾರೂ ಆ ರೀತಿಯ ಹೇಳಿಕೆಗಳನ್ನು ನೀಡಬಾರದು. ಆ ಹೇಳಿಕೆಯನ್ನು ಯಾವ ಹಿನ್ನೆಲೆಯಲ್ಲಿ ನೀಡಲಾಗಿದೆ ಎಂದು ನಳೀನ್ ಕುಮಾರ್ ಕಟೀಲ್ ಜೊತೆ ಮಾತನಾಡುವುದಾಗಿ ಹೇಳಿದ್ದಾರೆ.
ತಮ್ಮ ಪಕ್ಷದ ಕಾರ್ಯಕರ್ತರು ಗೌರವಿಸುವ ರಾಹುಲ್ ಗಾಂಧಿಯಂತಹ (Rahul Gandhi) ನಾಯಕನ ವಿರುದ್ಧ ಯಾರೂ ಅವಹೇಳನಕಾರಿಯಾಗಿ ಮಾತನಾಡಬಾರದು ಎಂದು ಅವರು ಹೇಳಿದರು. ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಸಿಂಧಗಿಗೆ ತೆರಳಿದ್ದ ವೇಳೆ, ಬಿಎಸ್ ವೈ (BSY) ಮಾಧ್ಯಮಗಳ ಜೊತೆ ಮಾತನಾಡಿದರು.
ಈ ವಾರದ ಆರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದ ನಂತರ ಉಭಯ ಪಕ್ಷಗಳ ನಡುವೆ, ವಾಕ್ಸಮರ ಜೋರಾಗಿಯೇ ನಡೆಯುತ್ತಿದೆ. ಕರ್ನಾಟಕ ಕಾಂಗ್ರೆಸ್ (Karnataka congress) ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ಮೂಲಕ ಮಾಡಿದ್ದ ಈ ಟ್ವೀಟ್ ಬಗ್ಗೆ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿಷಾದ ವ್ಯಕ್ತಪಡಿಸಿದ್ದರು. ಇದಾದ ಬಳಿಕ ಮಂಗಳವಾರ, ನಳೀನ್ ಕುಮಾರ್ ಕಟೀಲ್ (Naleen Kumar kateel), ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಇದೀಗ ಈ ಹೇಳಿಕೆಗಳಿಗೆ ಕಾಂಗ್ರೆಸ್ ನಿಂದ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಈ ಮಧ್ಯೆ, ಆರ್ಎಸ್ಎಸ್ (RSS) ವಿರುದ್ಧ ಟೀಕೆ ಮಾಡಿರುವ ಕಾರಣಕ್ಕಾಗಿ, ಬಿಜೆಪಿ ಇಂದು ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಎಚ್ಡಿ ಕುಮಾರಸ್ವಾಮಿ ವಿರುದ್ದ ವಾಗ್ದಾಳಿ ನಡೆಸಿದೆ. ಕುಮಾರಸ್ವಾಮಿ (HD Kumaraswamy) ವಿರುದ್ಧ ಟ್ವಿಟ್ಟರ್ ನಲ್ಲಿ ವಾಗ್ದಾಳಿ ನಡೆಸಿರುವ ಬಿಜೆಪಿ, ಹೆಚ್ ಡಿಕೆ ವೈಯಕ್ತಿಕ ಜೀವನದ ಬಗ್ಗೆ ಟೀಕಾಪ್ರಹಾರ ನಡೆಸಿದೆ.
ಈ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ವೈಯಕ್ತಿಕ ವಿಚಾರಗಳನ್ನು ಎಳೆದು ತರುವುದನ್ನು ನಿಲ್ಲಿಸುವಂತೆ ಹೇಳಿದ್ದಾರೆ. ತಾವು ಕೂಡಾ ಕೇಸರಿ ಪಕ್ಷದ ಹಲವು ನಾಯಕರ ಸತ್ಯವನ್ನು ತಿಳಿದಿರುವುದಾಗಿ ಎಚ್ಚರಿಕೆ ನೀಡಿದ್ದಾರೆ.