ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಬ್ರಿಟೀಷರಿಗಿಂತ ಹೆಚ್ಚು ಸಮಾಜವನ್ನು ಒಡೆದಿದ್ದಾರೆ; ನಳಿನ್ ಕುಮಾರ್ ಕಟೀಲ್

ಅಧಿಕಾರ ಉಳಿಸಿಕೊಳ್ಳುವುದಕ್ಕಾಗಿ ಬ್ರಿಟೀಷರಿಗಿಂತ ಹೆಚ್ಚಾಗಿ ಸಮಾಜವನ್ನು ಒಡೆದ ಮುಖ್ಯಮಂತ್ರಿ ಇದ್ದರೆ ಅದು ಸಿದ್ದರಾಮಯ್ಯ ಎಂದು ವಾಗ್ದಾಳಿ ನಡೆಸಿದ ಕಟೀಲ್, ನಮ್ಮ ರಾಜ್ಯದಲ್ಲಿ ವೀರಪ್ಪನ್‌ನಂತಹ ಹತ್ತಾರು ಹಂತಕರನ್ನು ಕಂಡಿದ್ದೇವೆ. ಅದೇ ರೀತಿಯಲ್ಲಿ ಕಾಂಗ್ರೆಸ್‌ನವರು ಆಡಳಿತ ನಡೆಸಿದರು.

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾನ ಮರ್ಯಾದೆ ಇದ್ದರೆ ಮನೆಯಲ್ಲಿ ಕುಳಿತುಕೊಳ್ಳಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೆಟ್ಟ ಮುಖ್ಯಮಂತ್ರಿ ಬೇಡವೆಂದು ಅವರ ತವರಾದ ಮೈಸೂರಿನಲ್ಲೇ ಜನರು ಮನೆಗೆ ಕಳುಹಿಸಿದ್ದಾರೆ. ಎಲ್ಲೆಲ್ಲೋ ನಿಂತು ಗೆಲ್ಲುವಂತಹ ಪರಿಸ್ಥಿತಿ ಒಬ್ಬ ಮುಖ್ಯಮಂತ್ರಿಯಾಗಿದ್ದವರಿಗೆ ಬಂದಿದೆ. ರಾಜ್ಯದ ಜನರು ಸಿದ್ದರಾಮಯ್ಯ ಅವರನ್ನು ತಿರಸ್ಕಾರ ಮಾಡಿದ್ದಾರೆ. ಸಿದ್ದರಾಮಯ್ಯ ಅವರಿಗೆ ಮಾನ ಮರ್ಯಾದೆ ಇದ್ದರೆ ಮನೆಯಲ್ಲಿ ಕುಳಿತುಕೊಳ್ಳಬೇಕು ಎಂದು ವ್ಯಂಗ್ಯವಾಡಿದರು.

ಇನ್ನು ಅಧಿಕಾರ ಉಳಿಸಿಕೊಳ್ಳುವುದಕ್ಕಾಗಿ ಬ್ರಿಟೀಷರಿಗಿಂತ ಹೆಚ್ಚಾಗಿ ಸಮಾಜವನ್ನು ಒಡೆದ ಮುಖ್ಯಮಂತ್ರಿ ಇದ್ದರೆ ಅದು ಸಿದ್ದರಾಮಯ್ಯ ಎಂದು ವಾಗ್ದಾಳಿ ನಡೆಸಿದ ಕಟೀಲ್, ನಮ್ಮ ರಾಜ್ಯದಲ್ಲಿ ವೀರಪ್ಪನ್‌ನಂತಹ ಹತ್ತಾರು ಹಂತಕರನ್ನು ಕಂಡಿದ್ದೇವೆ. ಅದೇ ರೀತಿಯಲ್ಲಿ ಕಾಂಗ್ರೆಸ್‌ನವರು ಆಡಳಿತ ನಡೆಸಿದರು. ಟಿಪ್ಪು ಸುಲ್ತಾನ್ ಜಯಂತಿ ಹೆಸರಿನಲ್ಲಿ ಗಲಭೆ ಸೃಷ್ಟಿಸಿದರು. ಲಿಂಗಾಯತ-ವೀರಶೈವ ಎಂದು ಸಮಾಜ ಒಡೆದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗೌರವದಿಂದ ನಡೆದುಕೊಳ್ಳಬೇಕು ಹಾಗೂ ಮಾತನಾಡಬೇಕು ಎಂದ ಕಟೀಲ್, ಅವರು ಮುಖ್ಯಮಂತ್ರಿಯಾಗಿದ್ದಾಗ ಮೂರು ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡರು. ಅವರು ರೈತರ ಮನೆಗೂ ಹೋಗಿ ಅವರ ಕುಟುಂಬಿಕರಿಗೆ ಸಾಂತ್ವಾನ ಹೇಳಲಿಲ್ಲ. ಈಗ ನಮ್ಮ ಸರ್ಕಾರದ ಬಗ್ಗೆ ಮಾತನಾಡುವ ಯೋಗ್ಯತೆ ಏನಿದೆ ಎಂದು ಪ್ರಶ್ನಿಸಿದ್ದಾರೆ.

 

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *