Cyclone Yaas: ತೌಕ್ತೆ ಬೆನ್ನಲ್ಲೇ ಮೇ 23ರಿಂದ ಅಪ್ಪಳಿಸಲಿದೆ ಯಾಸ್ ಚಂಡಮಾರುತ; ನಾಳೆಯಿಂದ ಭಾರೀ ಮಳೆ ಸಾಧ್ಯತೆ

ಬೆಂಗಳೂರು (ಮೇ 20): ಕರ್ನಾಟಕ, ಕೇರಳ, ಮಹಾರಾಷ್ಟ್ರ, ಗುಜರಾತ್, ಒರಿಸ್ಸಾ ಸೇರಿದಂತೆ ಕೆಲವು ರಾಜ್ಯಗಳಲ್ಲಿ ತೌಕ್ತೆ ಚಂಡಮಾರುತ ಅಪ್ಪಳಿಸಿ ಅವಾಂತರ ಸೃಷ್ಟಿಸಿತ್ತು. ಇನ್ನೂ ಆ ಚಂಡಮಾರುತದ ಪರಿಣಾಮ ಸಂಪೂರ್ಣ ಮಾಸಿಲ್ಲ. ಅಷ್ಟರಲ್ಲಾಗಲೇ ಮತ್ತೊಂದು ಚಂಡಮಾರುತ ಅಪ್ಪಳಿಸಲು ಸಜ್ಜಾಗಿದೆ. ಯಾಸ್ ಚಂಡಮಾರುತ ಮೇ 23ರಿಂದ ಆರ್ಭಟಿಸಲಿದ್ದು, ನಾಳೆಯಿಂದ ಮೇ 26ರವರೆಗೆ ಭಾರೀ ಮಳೆಯಾಗಲಿದೆ. ಪಶ್ಚಿಮ ಬಂಗಾಳ, ಒರಿಸ್ಸಾ, ತಮಿಳುನಾಡು, ಗೋವಾ ಸೇರಿದಂತೆ ಕರಾವಳಿ ತೀರದ ರಾಜ್ಯಗಳಲ್ಲಿ ಯಾಸ್ ಚಂಡಮಾರುತದ ಆರ್ಭಟವಿರಲಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಮೇ 23ರಿಂದ 26ರವರೆಗೆ ಯಾಸ್ ಚಂಡಮಾರುತ ಪಶ್ಚಿಮ ಕರಾವಳಿಯ ರಾಜ್ಯಗಳಿಗೆ ಅಪ್ಪಳಿಸಲಿದೆ. ಮೇ 23ರಂದು ಈ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಳ್ಳಲಿದ್ದು, ಮೇ 26ರವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 1ರಂದು ಕೇರಳಕ್ಕೆ ಮುಂಗಾರು ಪ್ರವೇಶವಾಗಲಿದೆ. ಅಷ್ಟರೊಳಗೆ ಯಾಸ್ ಎಂಬ ಮತ್ತೊಂದು ಚಂಡಮಾರುತ ಅಪ್ಪಳಿಸಲಿದ್ದು, ಇನ್ನೊಂದು ವಾರ ದಕ್ಷಿಣ ಕನ್ನಡ, ಉಡುಪಿ, ಕಾರವಾರ ಭಾಗಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇಂದು ಬೆಳಗ್ಗೆಯಿಂದಲೇ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆ ಮುಂದುವರೆಯುವ ಸಾಧ್ಯತೆಯಿದೆ.

ಬಂಗಾಳ ಕೊಲ್ಲಿಯಲ್ಲಿ ಮೇ 23ರಂದು ಸೃಷ್ಟಿಯಾಗುವ ಯಾಸ್ ಚಂಡಮಾರುತ ಬಳಿಕ ಪಶ್ಚಿಮ ಬಂಗಾಳ ಮತ್ತು ಒರಿಸ್ಸಾ ಕಡೆಗೆ ಚಲಿಸುವ ಸಾಧ್ಯತೆಯಿದೆ. ಹೀಗಾಗಿ, ಕರಾವಳಿ ತೀರದಲ್ಲಿರುವ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ ಚಂಡಮಾರುತವಾಗಿ ಬದಲಾಗಲಿದ್ದು, ಗುಜರಾತ್, ಮಹಾರಾಷ್ಟ್ರದ, ಪಶ್ಚಿಮ ಬಂಗಾಳ, ಒರಿಸ್ಸಾ ಸೇರಿ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಈಗಾಗಲೇ ಕರ್ನಾಟಕ, ಕೇರಳ, ಮಹಾರಾಷ್ಟ್ರ, ಗುಜರಾತ್​, ಒರಿಸ್ಸಾದಲ್ಲಿ ತೌಕ್ತೆ ಚಂಡಮಾರುತ ಸಾಕಷ್ಟು ಅನಾಹುತಗಳನ್ನು ಸೃಷ್ಟಿಸಿದೆ. ಗುಜರಾತ್​ನಲ್ಲಿ 16 ಸಾವಿರಕ್ಕೂ ಹೆಚ್ಚು ಮನೆಗಳು ಧ್ವಂಸವಾಗಿದ್ದು, ಮಹಾರಾಷ್ಟ್ರದಲ್ಲೂ ಅನೇಕ ಆಸ್ತಿಪಾಸ್ತಿ ಹಾನಿಯಾಗಿದೆ. ಗುಜರಾತ್​ ಮತ್ತು ಮಹಾರಾಷ್ಟ್ರದಲ್ಲಿ ತೌಕ್ತೆ ಚಂಡಮಾರುತದಿಂದ 33 ಜನರು ಸಾವನ್ನಪ್ಪಿದ್ದಾರೆ. ಗುಜರಾತ್​ನಲ್ಲಿ 23 ವರ್ಷಗಳಿಂದೀಚೆಗೆ ಉಂಟಾದ ಅತಿ ಭೀಕರ ಚಂಡಮಾರುತ ಇದು ಎನ್ನಲಾಗಿದೆ. ಇದರ ಬೆನ್ನಲ್ಲೇ ಯಾಸ್ ಚಂಡಮಾರುತದ ಆತಂಕವೂ ಶುರುವಾಗಿದ್ದು, ನದಿತೀರದ, ತಗ್ಗುಪ್ರದೇಶದ ಜನರು ಆತಂಕಕ್ಕೀಡಾಗಿದ್ದಾರೆ

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *