ಖಾಲಿಯಿರುವ ವೈದ್ಯರು, ತಜ್ಞರ ನೇಮಕಾತಿ ಶೀಘ್ರ; ಸುಧಾಕರ್ ಭರವಸೆ
ಗದಗ : ಹಳೇ ಮೈಸೂರು ಮತ್ತು ಬೆಂಗಳೂರು ಪ್ರದೇಶಗಳನ್ನು ಹೊರತುಪಡಿಸಿ ರಾಜ್ಯದ ಹಿಂದುಳಿದ, ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ವೈದ್ಯರು ಮತ್ತು ತಜ್ಞರ ಹುದ್ದೆಗಳನ್ನು ಆದ್ಯತೆ ಮೇರೆಗೆ ನೇಮಕ ಮಾಡಲಾಗುವುದು. ಕೆಲ ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಗದಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೋವಿಡ್ ಪರಿಶೀಲನಾ ಸಭೆಯಲ್ಲಿ ಜಿಲ್ಲೆಯ ಕೋವಿಡ್ ಪರಿಸ್ಥಿತಿ ಕುರಿತು ಇಂದು ಪರಾಮರ್ಶೆ ನಡೆಸಿದ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ತಾಲ್ಲೂಕು ಆಸ್ಪತ್ರೆಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ವೈದ್ಯರು ಮತ್ತು ತಜ್ಞರ ಹುದ್ದೆ ಖಾಲಿಯಿವೆ. ಅವುಗಳ ನೇಮಕಕ್ಕೆ ಆದ್ಯತೆ ನೀಡಲಾಗುವುದು. ಇಲ್ಲವಾದಲ್ಲಿ ಗ್ರಾಮೀಣ ಭಾಗದ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಆಗುತ್ತದೆ ಎಂದರು.
ತಾಲ್ಲೂಕು ಆಸ್ಪತ್ರೆ ಆಗಿದ್ದರೂ ಇನ್ನೂ 30 ಹಾಸಿಗೆಗಳ ಆಸ್ಪತ್ರೆ ಆಗಿರುವ ಶಿರಹಟ್ಟಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಿ ನೂರು ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮಾಡಲಾಗುವುದು. ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ ಕನಿಷ್ಠ ಆರು ವೆಂಟಿಲೇಟರ್ ಮತ್ತು ಐವತ್ತು ಆಕ್ಸಿಜನ್ ಹಾಸಿಗೆಗಳನ್ನು ಸಿದ್ಧಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಹೆಚ್ಚುವರಿಯಾಗಿ ಆಕ್ಸಿಜನ್ ಕಾನ್ಸಂಟ್ರೇಟರ್ಸ್ಗಳನ್ನು ಜಿಲ್ಲೆಗೆ ಕಳುಹಿಸಲಾಗುವುದು. ತಾಲ್ಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಜಿಮ್ಸ್ನಲ್ಲಿ 270 ವೈದ್ಯರು ಇದ್ದಾರೆ. 87 ಬೋಧಕ ಹುದ್ದೆಗಳು ಖಾಲಿ ಇವೆ. ಅವುಗಳ ನೇಮಕಕ್ಕೆ ಎರಡು ವಾರದಲ್ಲಿ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಕೆ ನೀಡಿದರು.