ಕಲಬುರಗಿ ಜಿಲ್ಲಾದ್ಯಂತ ಮೇ 27 ರಿಂದ 4 ದಿನ ಲಾಕ್

ಕಲಬುರಗಿ : ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕಾಗಿ ಕಲಬುರಗಿ ಜಿಲ್ಲೆಯಾದ್ಯಂತ ಮೇ.27ರ ಬೆಳಗ್ಗೆ 6 ಗಂಟೆಯಿಂದ ಮೇ.31ರ ಬೆಳಿಗ್ಗೆ 6 ಗಂಟೆ ವರೆಗೆ ಅತ್ಯಗತ್ಯ ಸೇವೆಗಳನ್ನು ಹೊರತುಪಡಿಸಿ ಇತರೆ ಎಲ್ಲಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ಬಂಧಿಸಿ ವಿಪತ್ತು ನಿರ್ವಹಣಾ ಕಾಯ್ದೆ-2005 ಕಲಂ 34 (ಎಂ) ಮತ್ತು ದಂಡ ಪ್ರಕ್ರಿಯೆ ಸಂಹಿತೆ 1973ರ ಕಲಂ 144ರನ್ವಯ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಅತ್ಯಗತ್ಯ ವಸ್ತುಗಳಾದ ಹಾಲು, ಮೊಟ್ಟೆ, ಹೊಟೆಲ್‌ಗಳಲ್ಲಿ ಊಟ ಮತ್ತು ಉಪಹಾರ ಪಾರ್ಸಲ್ ಸೇವೆ ಲಭ್ಯವಿರಲಿವೆ. ಆಸ್ಪತ್ರೆ, ಔಷಧಿ ಅಂಗಡಿಗಳು, ಅಂಬುಲೆನ್ಸ್, ಅಗ್ನಿಶಾಮಕ, ಪೆಟ್ರೋಲ್ ಪಂಪ್ ಹಾಗೂ ಇತರೆ ತುರ್ತು ವೈದ್ಯಕೀಯ ಸೇವೆಗಳನ್ನು ಎಂದಿನಂತೆ ಕಾರ್ಯನಿರ್ವಹಿಸಲಿವೆ. ರೈಸ್ ಮಿಲ್, ದಾಲ್ ಮಿಲ್ ಒಳಗಿನ ಚಟುವಟಿಕೆಗಳಿಗೆ ಸ್ಥಳದಲ್ಲಿಯೇ ಲಭ್ಯವಿರುವ ಕಾರ್ಮಿಕರಿಂದ ಕಾರ್ಯನಿರ್ವಹಣೆಗೆ ಯಾವುದೇ ಅಡ್ಡಿಯಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದಲ್ಲದೆ ಈ ಆದೇಶದ ಹೊರತಾಗಿ ಕಂಟೇನ್‌ಮೆಂಟ್ ವಲಯ ಹೊರಗಡೆ ಈ ಕೆಳಕಂಡ ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ.

ಸರ್ಕಾರಿ ಸಾರಿಗೆ ಸೇವೆಯನ್ನು ನಿರ್ಬಂಧಿಸಲಾಗಿದೆ. ತುರ್ತು ವೈದ್ಯಕೀಯ ಸೇವೆಗಳ ಸಂದರ್ಭದಲ್ಲಿ ಖಾಸಗಿ ಸಾರಿಗೆ ಸೇವೆ ಬಳಕೆಗೆ ಅವಕಾಶವಿದ್ದು, ವೈದ್ಯಕೀಯ ದಾಖಲೆಗಳನ್ನು ಚೆಕ್ ಪೋಸ್ಟ್ ಗಳಲ್ಲಿ ತೋರಿಸಿ ಪ್ರಯಾಣಿಸಬಹುದು. ಇನ್ನುಳಿದಂತೆ ಎಲ್ಲಾ ರೀತಿಯ ಖಾಸಗಿ ಸಾರಿಗೆಯನ್ನು ನಿರ್ಬಂಧಿಸಲಾಗಿದೆ. ಆಸ್ಪತ್ರೆಗಳಲ್ಲಿ ದಾಖಲಾಗಿರುವ ಕೋವಿಡ್, ನಾನ್ ಕೋವಿಡ್ ರೋಗಿಗಳ ಆರೈಕೆಗೆ ಸಂಬಂಧಪಟ್ಟ ಇಬ್ಬರು ವ್ಯಕ್ತಿಗಳಿಗೆ ಆರೈಕೆ ಮಾಡುವುದಕ್ಕೆ ಅನುಮತಿಸಿದ್ದು, ಸಂಬಂಧಿಸಿದ ಆಸ್ಪತ್ರೆಗಳ ನೋಡಲ್ ಅಧಿಕಾರಿಗಳಿಂದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಪಡೆಯಬೇಕು.

ಎಲ್ಲಾ ರೀತಿಯ ಸರಕುಗಳ ಸಾಗಾಣಿಕೆಗೆ ಮತ್ತು ಖಾಲಿ ವಾಹನಗಳಿಗೆ ಅನುಮತಿಸಲಾಗಿದೆ. ದಿನಪ್ರತಿಕೆ, ಎ.ಟಿ.ಎಂ. ಸೇವೆಗಳಿಗೆ ಅನುಮತಿಸಲಾಗಿದೆ.

ಕೃಷಿ ಸಂಬಂಧಿತ ಚಟುವಟಿಕೆಗಳು ಬೆಳಿಗ್ಗೆ 6 ಗಂಟೆಯಿಂದ ಬೆಳಿಗ್ಗೆ 10 ಗಂಟೆಯವರೆಗೆ ಮಾತ್ರ ಅನುಮತಿಸಿದೆ. ಬೀಜ, ರಸಗೊಬ್ಬರ, ಸಾಗಾಣಿಕೆ ಸಂಬಂಧ ರೈಲ್ವೆ ರೇಕ್‌ಗಳಲ್ಲಿ ಕಾರ್ಮಿಕರಿಗೆ ಅನುಮತಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಯಾವುದೇ ಅಂಗಡಿ ಮುಂಗಟ್ಟುಗಳಿಗೆ ಅನುಮತಿ ಇರುವುದಿಲ್ಲ. ಆಹಾರ ಸಂಸ್ಕರಣೆಯ ಸೇವೆಗಳಾದ ಕೋಲ್ಡ್ ಸ್ಟೋರೇಜ್‌ಗಳು, ಔಷಧ ಉದ್ಯಮಗಳು, ರಾಸಾಯನಿಕ ಉದ್ಯಮಗಳಲ್ಲಿ ಶೇ.೫೦ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.

ಖಾನಾವಳಿ-ಹೋಟೆಲ್‌ಗಳಿಂದ ಮನೆ-ಮನೆಗೆ ಪಾರ್ಸಲ್ ಮೂಲಕ ಊಟ-ಉಪಹಾರ ಸರಬರಾಜು ಮಾಡಲು ಅವಕಾಶ ಕಲ್ಪಿಸಲಾಗಿದೆ. ನಗರ-ಪಟ್ಟಣಗಳಲ್ಲಿ ಇಂದಿರಾ ಕ್ಯಾಂಟಿನ್ ದಿನ ಪೂರ್ತಿ ತರೆಯಲು ಅನುಮತಿಸಿದೆ. ನಗರ ಸ್ಥಳೀಯ ಸಂಸ್ಥೆಯ ಮುಖ್ಯಸ್ಥರುಗಳು ಆಸ್ಪತ್ರೆಗಳಲ್ಲಿ ರೋಗಿಗಳನ್ನು ನೋಡಿಕೊಳ್ಳುವವರಿಗೆ ಊಟದ ವ್ಯವಸ್ಥೆಯನ್ನು ಮಾಡಲು ತಿಳಿಸಲಾಗಿದೆ.

ಕಂದಾಯ, ಗ್ರಾಮೀಣಾಭಿವೃದ್ದಿ, ನಗರ ಸ್ಥಳೀಯ ಸಂಸ್ಥೆಗಳು, ಆರೋಗ್ಯ, ಪಶು ವೈದ್ಯಕೀಯ, ವೈದ್ಯಕೀಯ ಶಿಕ್ಷಣ, ಪೊಲೀಸ್, ಗೃಹ ರಕ್ಷಕ ದಳ, ನಾಗರಿಕ ರಕ್ಷಣೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ವಿಪತ್ತು ನಿರ್ವಹಣೆ, ಕಾರಾಗೃಹ ಸೇವೆಗಳಿಗೆ ಯಾವುದೇ ನಿರ್ಬಂಧವಿರುವುದಿಲ್ಲ. ಖಜಾನೆ ಇಲಾಖೆಯು ಶೇ.೫೦ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ. ಉಳಿದಂತೆ ಇತರೆ ಎಲ್ಲಾ ಸರಕಾರಿ, ಅರೆ ಸರಕಾರಿ, ಖಾಸಗಿ ಕಛೇರಿಗಳು ಹಾಗೂ ಎನ್.ಜಿ.ಓ.ಗಳ ಎಲ್ಲಾ ಅಧಿಕಾರಿ-ಸಿಬ್ಬಂದಿಗಳು ಮನೆಯಿಂದಲೇ ಕೆಲಸ ನಿರ್ವಹಿಸಲು ತಿಳಿಸಲಾಗಿದೆ.

ಕೋವಿಡ್-19 ಕಾರ್ಯಕ್ಕೆ ನಿಯೋಜಿಸಿದ ಎಲ್ಲಾ ಕಛೇರಿಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಗೂ ವೈದ್ಯಕೀಯ ಹಾಗೂ ತುರ್ತು ಸೇವೆಗಳ ಎಲ್ಲಾ ಅಧಿಕಾರಿಗಳು / ಸಿಬ್ಬಂದಿಗಳ ಕರ್ತವ್ಯ ನಿಮಿತ್ಯ ಓಡಾಟಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ.

ನ್ಯಾಯಾಲಯಗಳು ಹಾಗೂ ನ್ಯಾಯಾಂಗ ಕೆಲಸಗಳಿಗೆ ಸಂಬಂಧಿಸಿದ ಕಛೇರಿಗಳು ಉಚ್ಚ ನ್ಯಾಯಾಂಲಯದ ಆದೇಶದನ್ವಯ ಕಾರ್ಯನಿರ್ವಹಿಸುವುದು.

ರಾತ್ರಿ ವಸತಿ ರಹಿತ ನಿರ್ಗತಿಕರ ಕೇಂದ್ರ, ವೃದ್ಧಾಶ್ರಮ, ಬಾಲ ಮಂದಿರ, ಬಾಲಾಶ್ರಮ, ಅನಾಥಾಶ್ರಮಗಳಿಗೆ ಅನುಮತಿಸಲಾಗಿದೆ. ನಿರ್ಮಾಣ ಸ್ಥಳದಲ್ಲಿಯೇ ವಾಸವಾಗಿರುವ ಕಾರ್ಮಿಕರನ್ನು ಬಳಸಿಕೊಂಡು ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ.

ಆಸ್ಪತ್ರೆಗಳ ಒಳ ಹಾಗೂ ಹೊರ ರೋಗಿಗಳಿಗೆ ಉಪಹಾರ-ಊಟದ ವ್ಯವಸ್ಥೆಯನ್ನು ಕಲ್ಪಿಸುವುದು ಸಂಬಂಧಪಟ್ಟ ಆಸ್ಪತ್ರೆಗಳ ಜವಾಬ್ದಾರಿಯಾಗಿರುತ್ತದೆ.

ರಾಜ್ಯ ಸರಕಾರದ ಆದೇಶ ದಿ. 07
7-5-2021ರಲ್ಲಿ ತಿಳಿಸಿರುವಂತೆ ಅಂತರ ರಾಜ್ಯ ಮತ್ತು ಅಂತರ ಜಿಲ್ಲಾ ವ್ಯಕ್ತಿಗಳ ಸಂಚಾರಕ್ಕೆ ಅನುಮತಿಸಲಾಗಿದೆ.

ಗುಂಪು ಗೂಡುವಂತಿಲ್ಲ, ಸಾರ್ವಜನಿಕ ಸ್ಥಳದಲ್ಲಿ ಉಗಿಯುವಂತಿಲ್ಲ: ಗುಂಪುಗೂಡುವಿಕೆ, ಬೃಹತ್ ಸಾರ್ವಜನಿಕ ಸಭೆಗಳು, ಒಟ್ಟುಗೂಡುವಿಕೆ ನಿಷೇಧವನ್ನು ಮುಂದುವರೆಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ, ಪಾನ್, ಗುಟ್ಕಾ, ತಂಬಾಕು ಇತ್ಯಾದಿಗಳ ಬಳಕೆಯನ್ನು ನಿಷೇಧಿಸಿದೆ. ಇದಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಉಗಿಯುವುದನ್ನು ನಿರ್ಬಂಧಿಸಲಾಗಿದೆ, ಇದನ್ನು ಉಲ್ಲಂಘಿಸಿದಲ್ಲಿ ದಂಡ ವಿಧಿಸಲಾಗುತ್ತದೆ.

ಮದುವೆಗೆ 10 ಜನ, ಅಂತ್ಯಕ್ರಿಯೆಗೆ 5 ಜನರಿಗೆ ಅವಕಾಶ: ಸಾರ್ವಜನಿಕವಾಗಿ ಮದುವೆ ಕಾರ್ಯಕ್ರಮ ಆಯೋಜಿಸುವಂತಿಲ್ಲ. ಮನೆಯೊಳಗಿನ ಮದುವೆಗೆ ಅನುಮತಿಸಿದ್ದು, ಸಂಬಂಧಿಸಿದ ತಹಶೀಲ್ದಾರರ ಪೂರ್ವಾನುಮತಿ ಪಡೆದು 10 ಜನರು ಮಾತ್ರ ಪಾಲ್ಗೊಳ್ಳಬಹುದಾಗಿದೆ. ಮರಣ, ಅಂತ್ಯಕ್ರಿಯೆ, ಶವಸಂಸ್ಕಾರಕ್ಕೆ 5 ಜನರಿಗೆ ಮಾತ್ರ ಸೀಮಿತಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಮಾಸ್ಕ್ ಧರಿಸದಿದ್ದಲ್ಲಿ ದಂಡ: ಸಾರ್ವಜನಿಕ ಸ್ಥಳ, ಕೆಲಸದ ಸ್ಥಳ ಹಾಗೂ ಪ್ರಯಾಣದ ಸಂದರ್ಭದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇಲ್ಲದಿದ್ದಲ್ಲಿ ನಗರ ಪ್ರದೇಶಗಳಲ್ಲಿ 250 ರೂ. ಮತ್ತು ಗ್ರಾಮೀಣ ಪ್ರದೇಶದಲ್ಲಿ 100 ರೂ. ದಂಡ ವಿಧಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕೋವಿಡ್-19 ನಿರ್ವಹಣೆಯ ಲಾಕ್ ಡೌನ್ ಕ್ರಮಗಳನ್ನು ಮತ್ತು ರಾಷ್ಟ್ರೀಯ ನಿರ್ದೇಶನಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಅಧಿನಿಯಮ-2005ರ ಸೆಕ್ಷನ್ 51 ರಿಂದ 60ರ ಉಪಬಂಧಗಳು ಮತ್ತು ಭಾರತೀಯ ದಂಡ ಸಂಹಿತೆ ಸೆಕ್ಷನ್ 144ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ದಂಡಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಎಚ್ಚರಿಕೆ ನೀಡಿದ್ದಾರೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *