ವೀಕೆಂಡ್ ಕರ್ಫ್ಯೂ : ಮೇಕೆದಾಟು ಪಾದಯಾತ್ರೆಗೆ ಸಂಕಷ್ಟ! ಕೈ ನಾಯಕರ ಮುಂದಿನ ನಡೆ ಏನು?

ಹೈಲೈಟ್ಸ್‌:

  • ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ವೀಕೆಂಡ್ ಕರ್ಫ್ಯೂ
  • ಮೇಕೆದಾಟು ಪಾದಯಾತ್ರೆಗೆ ಉಂಟಾಗಿದೆ ಸಂಕಷ್ಟ
  • ಕಾಂಗ್ರೆಸ್ ನಾಯಕರ ಮುಂದಿನ ನಡೆ ಏನು?

ಬೆಂಗಳೂರು: ಕೋವಿಡ್ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಒಳಗೊಂಡು ಕೆಲವೊಂದು ಕಠಿಣ ನಿಯಮಾವಳಿಗಳನ್ನು ರೂಪಿಸಲಾಗಿದೆ. ಶುಕ್ರವಾರ ರಾತ್ರಿಯಿಂದ ಸೋಮವಾರ ಬೆಳಗ್ಗಿನ ವರೆಗೂ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅಷ್ಟೇ ಅಲ್ಲದೆ ಸಭೆ, ರಾಜಕೀಯ ಸಮಾವೇಶಗಳು, ಪ್ರತಿಭಟನೆಗಳಿಗೂ ನಿರ್ಬಂಧ ಹೇರಲಾಗಿದೆ. ಈ ನಡುವೆ ಜನವರಿ 9 ರಿಂದ ಕಾಂಗ್ರೆಸ್ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ಹಮ್ಮಿಕೊಂಡಿದೆ. ಪಾದಯಾತ್ರೆಗೆ ಭರ್ಜರಿ ತಯಾರಿ ನಡೆಸಿದ್ದ ಕಾಂಗ್ರೆಸ್ ಇದೀಗ ಸರ್ಕಾರದ ಈ ನಿಲುವಿನಿಂದ ಗೊಂದಲದಲ್ಲಿದೆ.

ಜನವರಿ 9 ರಿಂದ 10 ದಿನಗಳ ಕಾಲ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಹಮ್ಮಿಕೊಂಡಿತ್ತು. ಈಗಾಗಲೇ ಇದಕ್ಕಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪಾದಯಾತ್ರೆ ಯಶಸ್ವಿಗೊಳಿಸಲು ಕಾಂಗ್ರೆಸ್ ತಯಾರಿ ನಡೆಸುತ್ತಿದೆ. ಸರಣಿ ಸಭೆಗಳು, ಸಾರ್ವಜನಿಕ ಕಾರ್ಯಕ್ರಮಗಳನ್ನು ನಡೆಸಿ ಪಾದಯಾತ್ರೆಗೆ ಬರುವಂತೆ ಜನರಿಗೆ ಆಹ್ವಾನ ನೀಡಲಾಗಿದೆ.

ಆದರೆ ಇದೀಗ ರಾಜ್ಯ ಸರ್ಕಾರ ಕೋವಿಡ್ ಹೆಚ್ಚಳವಾಗುತ್ತಿರುವ ಕಾರಣಕ್ಕಾಗಿ ವೀಕೆಂಡ್ ಕರ್ಫ್ಯೂ ಮತ್ತು ಕೆಲವೊಂದು ನಿರ್ಬಂಧಗಳನ್ನು ಜಾರಿಗೊಳಿಸಿದೆ. ಇದರಂತೆ ಪ್ರತಿಭಟನೆ, ಸಭೆ, ಸಮಾವೇಶಗಳು ನಡೆಸುವ ಹಾಗಿಲ್ಲ. ಪರಿಣಾಮ ಕಾಂಗ್ರೆಸ್ ಪಕ್ಷದ ಹಮ್ಮಿಕೊಂಡಿದ್ದ ಮೇಕೆದಾಟು ಪಾದಯಾತ್ರೆಗೆ ಅಡ್ಡಿ ಉಂಡಾಗಿದೆ.

ಕಾಂಗ್ರೆಸ್ ನಿಲುವೇನು?

ಈಗಾಗಲೇ ಮೇಕೆದಾಟು ಪಾದಯಾತ್ರೆ ವಿಚಾರ ರಾಜಕೀಯ ಚರ್ಚೆಗೆ ಗ್ರಾಸವಾಗುತ್ತಿದೆ. ಮೇಕೆದಾಟು ಮೂಲಕ ಕಾಂಗ್ರೆಸ್ ರಾಜಕೀಯ ಗಿಮಿಕ್ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಮತ್ತೊಂದು ಕಡೆಯಲ್ಲಿ, ಪಾದಯಾತ್ರೆ ಅಡ್ಡಿಪಡಿಸುವ ಉದ್ದೇಶದಿಂದ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ.

ಈ ನಡುವೆ ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಆದರೆ ಇದೀಗ ಸರ್ಕಾರ ಜಾರಿಗೆ ತಂದಿರುವ ನಿಯಮಗಳನ್ನು ಮೀರುವ ಹಾಗೂ ಇಲ್ಲ ಅತ್ತ ಪಾದಯಾತ್ರೆ ನಿಲ್ಲಿಸುವ ಹಾಗೂ ಇಲ್ಲ ಎಂಬ ರೀತಿಯಲ್ಲಿ ಇಕ್ಕಟ್ಟಿಗೆ ಸಿಲುಕಿದೆ ಕಾಂಗ್ರೆಸ್. ಈ ನಿಟ್ಟಿನಲ್ಲಿ ಬುಧವಾರ ಕಾಂಗ್ರೆಸ್ ಮುಖಂಡರು ಮತ್ತೊಂದು ಸುತ್ತಿನ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *